ಸ್ಥಳೀಯ

ಜಿಲ್ಲೆಯ ಗ್ರಾಮ, ನಗರ ಪ್ರದೇಶಗಳ ನಾಗರೀಕರಿಗೆ ಶುದ್ದ ಕುಡಿಯುವ ನೀರು ಪೂರೈಸಲು ನಿಗಾ ವಹಿಸಿ : ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ

WhatsApp Group Join Now
Telegram Group Join Now

ಯಾದಗಿರಿ: ಮೇ , 27 : ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬರ ಪರಿಹಾರ ಹಾಗೂ ಕುಡಿಯುವ ನೀರು ಮತ್ತು ಮುಂಗಾರು ಪೂರ್ವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು. ಓವರ್ ಹೆಡ್ ಟ್ಯಾಂಕ್ ಮತ್ತು ನೀರಿನ ಮೂಲಗಳಿಂದ ಪರೀಕ್ಷೆಗೆ ಒಳಪಡಿಸಿ ಶುದ್ಧ ಕುಡಿಯುವ ನೀರನ್ನು ಪೂರೈಸಲು ವಿಶೇಷ ಗಮನ ನೀಡುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಅಧಿಕಾರಿಗಳು ಸಮರ್ಪಕವಾಗಿ ನೀರು ಸರಬರಾಜು ನಿರ್ವಹಣೆಯನ್ನು ಮಾಡಿದ್ದು ವಿವಿಧ 54 ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಮಾಲೀಕರಿಂದ ಪಡೆದ ನೀರಿಗೆ ಸಂಬಂಧಪಟ್ಟಂತೆ ತಕ್ಷಣ ಬಿಲ್ಲನ್ನು ವಿಳಂಬ ಮಾಡದೆ ಪಾವತಿಸಬೇಕು ಮುಂದಿನ ದಿನಗಳಲ್ಲಿಯೂ ಕೂಡ ನೀರಿನ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿ ಶುದ್ಧ ನೀರನ್ನು ಪೂರೈಸುವ ಬಗ್ಗೆ ಅವಶ್ಯಕ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಂಗಾರು ಹಂಗಾಮಿನಲ್ಲಿ ರೈತರಿಗೆ ತೊಂದರೆ ಆಗದಂತೆ ನಿಗಾ ವಹಿಸಬೇಕು. ವಿಶೇಷವಾಗಿ ಕಳಪೆ ಗುಣಮಟ್ಟದ ಬೀಜ ರಸಗೊಬ್ಬರ ಸರಬರಾಜು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಅದರಂತೆ ಗಡಿ ಭಾಗಗಳಲ್ಲಿ ಕಳಪೆ ಬೀಜ ಮತ್ತು ರಸಗೊಬ್ಬರ ಆಮದು ಆಗದಂತೆ ಎಚ್ಚರಿಕೆ ವಹಿಸಬೇಕು. ರೈತರಿಗೆ ಮುಂದಿನ ದಿನಗಳಲ್ಲಿ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ಎಚ್ಚರಿಕೆವಹಿಸಿ ಅವಶ್ಯಕತೆಗೆ ಅನುಗುಣವಾಗಿ ದಾಸ್ತಾನು ಇಟ್ಟುಕೊಳ್ಳಬೇಕು. ಕೃಷಿ ಇಲಾಖೆ ಅಧಿಕಾರಿಗಳು ಕ್ಷೇತ್ರವಾರು ಭೇಟಿ ನೀಡಿ ಕಳಪೆ ಬೀಜ, ರಸಗೊಬ್ಬರ ಪೂರೈಕೆ ಆಗದಂತೆ ನಿಗಾ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದು ಅವರಿಗೆ ತಲಾ 5 ಲಕ್ಷ ರೂ ದಂತೆ ಪರಿಹಾರವನ್ನು ಅವರ ವಾರಸುದಾರರಿಗೆ ವಿತರಿಸಲಾಗಿದೆ. ಜಾನುವಾರುಗಳ ಹಾನಿಗೆ ಸಂಬಂಧಪಟ್ಟಂತೆ ಪರಿಹಾರ ವಿತರಿಸಲಾಗಿದೆ. ಮೇ 26 ರಂದು ಸುರಿದ ಭಾರೀ ಮಳೆಯಿಂದಾಗಿ ಗುರುಮಿಠಕಲ್ ದಲ್ಲಿ ಬಾಲಕಿ ಒಬ್ಬಳು ಹಾಗೂ ಹುಣಸಗಿ ಯುಕೆಪಿಯಲ್ಲಿ ಓರ್ವ ವ್ಯಕ್ತಿ ಸಾವನಪ್ಪಿದ್ದು ಅವರಿಗೂ ಸಹ ಪರಿಹಾರ ವಿತರಿಸಲು ಸೂಚಿಸಲಾಗಿದೆ. ಅದರಂತೆ ಅಲ್ಲಿಪುರ ಗ್ರಾಮದಲ್ಲಿ ಮೂವರು ಸಾವನ್ನಪ್ಪಿರುವ ಕುರಿತಂತೆ ಕಾರಣ ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇತ್ತೀಚಿಗೆ ಸುರಿದ ಮಳೆಯಿಂದ ಆದ ಮನೆ ಹಾನಿ ಹಾಗೂ ಬೆಳೆ ಹಾನಿ ಮತ್ತು ತಾತ್ಕಾಲಿಕ ಶಡ್ಗಳ ಹಾನಿ, ವಿದ್ಯುತ್ ಸರಬರಾಜು ವ್ಯವಸ್ಥೆಗಳ ಹಾನಿ ಕುರಿತಂತೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಅನುದಾನ ಅನುಮೋದನೆ, ಖರ್ಚು ವೆಚ್ಚಗಳ ಮತ್ತು ಪ್ರಗತಿಯನ್ನು ತೀವ್ರಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ವಿದ್ಯುತ್ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಇನ್ನೂ ಹೆಚ್ಚಿನ ಜಾಗೃಕತೆಯಿಂದ ಕಾರ್ಯನಿರ್ಹಿಸುವಂತೆ ಅವರು ಸೂಚನೆ ನೀಡಿದರು.

ಜಲಜೀವನ ಮಿಷನ್, ಜಲಧಾರೆ, ವಿವಿಧ ಜಲಾಶಯಗಳ ಇನ್ ಪ್ಲೋ, ಔಟ್ ಪ್ಲೋ ಬಗ್ಗೆ ತೀವ್ರ ನಿಗಾ ಇಡುವಂತೆ ಸೂಚಿಸಿದ ಅವರು ಜಿಲ್ಲೆಯಲ್ಲಿನ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಶಿಕ್ಷಕರ, ಪಾಲಕರ ಆಸಕ್ತಿ ಅತ್ಯಂತ ಪ್ರಮುಖವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ, ಜಿಲ್ಲಾ ಪಂಚಾಯತ ಸಿಇಓ ಗರಿಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now

Related Posts